ಪಾದಚಾರಿಗೆ ಬೈಕ್ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

0

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲಿನಲ್ಲಿ ಮಾ. 16ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಾದಚಾರಿ ಕಾಪಿನಬಾಗಿಲಿನ ನಿವಾಸಿ ಸಾಬು ಮೋನು ಕೆ.ಇ (53) ಚಿಕಿತ್ಸೆ ಫಲಕಾರಿಯಾಗದೆ ಮಾ. 17ರಂದು ರಾತ್ರಿ ನಿಧನರಾಗಿದ್ದಾರೆ.

ಕೊಕ್ಕಡ ಪೇಟೆಗೆ ತೆರಳಿ ಮನೆಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಿ ಮನೆ ಕಡೆಗೆ ನಡೆದುಕೊಂಡು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ, ರಾತ್ರಿ 8.30ರ ಸುಮಾರಿಗೆ ಮೋಟಾರ್ ಸೈಕಲ್‌ ಅನ್ನು ಮಹೇಶ್ ಎಂಬುವವರು ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು. ಪರಿಣಾಮವಾಗಿ ಸಾಬು ಮೋನು ಕೆ.ಇ. ಗಂಭೀರವಾಗಿ ಗಾಯಗೊಂಡು, ಸ್ಥಳೀಯರು ತಕ್ಷಣ ಅವರನ್ನು ಎಬ್ಬಿಸಿ ಚಿಕಿತ್ಸೆ ನೀಡಿ ಬಳಿಕ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.17ರಂದು ಮೃತರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿದ್ದ ಮಹೇಶ್ ಎಂಬ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೂರು ನೀಡಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here