ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಯಕ್ಷಗಾನ ತರಬೇತಿ ಕಾರ್ಯಗಾರ ಉದ್ಘಾಟಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ತರಬೇತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರಬಂಧಕ ಗಿರೀಶ್ ರೈ ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.
ಯಕ್ಷಗಾನ ತರಬೇತುದಾರ ಅರುಣ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಿರೀಶ್ ರೈ ಯಕ್ಷಗಾನ ಕಲೆಯಿಂದ ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿಯಾಗುತ್ತದೆ, ಮಹಾಭಾರತ, ರಾಮಾಯಣದಂತಹ ಕಥೆಗಳನ್ನು ಯಕ್ಷಗಾನದಲ್ಲಿ ಪ್ರದರ್ಶಿಸಿದಾಗ ಅವುಗಳ ಕಥೆಯನ್ನು ಸುಲಭವಾಗಿ ಅರಿಯಲು ಸಾಧ್ಯವೆಂದು ತಿಳಿದರು. ಶಾಲೆಯಲ್ಲಿ ಹೆಚ್ಚಿನ ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅರುಣ್ ಕುಮಾರ್ ಅವರು ಯಕ್ಷಗಾನದಿಂದ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಮಟ್ಟ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡ ಅವರು ಹಳ್ಳಿಯ ಮಕ್ಕಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಯಕ್ಷಗಾನ ಕಲಿಯಲು ಉತ್ತಮವಾದ ಅವಕಾಶ ಮಾಡಿಕೊಟ್ಟಿದೆ ಇದನ್ನು ಎಲ್ಲ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶೀಲಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪುಷ್ಪಲತಾ ನಿರೂಪಿಸಿದರು. ಶಾಲಾ ಶಿಕ್ಷಕಿ ಜಿತೀಕ್ಷಾ ಧನ್ಯವಾದಗೈದರು.