ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತೀಯ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಅ.27ರಂದು ನೆರವೇರಿತು.
ಶಿಕ್ಷಣದೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿ ಜೀವನದ ಸಾರ್ಥಕತೆ ಸಾಧ್ಯವಾಗುವುದು ಎಂದು ಮಂಗಳೂರು ಕಿಟ್ಟೆಲ್ ಮೆಮೊರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗು ದ.ಕ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕರಾದ ವಿಠಲ್.ಎ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತೀಯ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ,ವಿದ್ಯಾರ್ಥಿಗಳು ಸಾಮಾಜಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಅನುಕಂಪ ಮತ್ತು ಸಹಾನುಭೂತಿಯನ್ನು ಹೊಂದಿದವರಾಗಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು.ಸಮಾಜ ಸೇವೆಗೆ ಹಣ ಅಥವಾ ಶ್ರೀಮಂತಿಕೆಯ ಅಗತ್ಯವಿಲ್ಲ.ಉತ್ತಮ ಮನಸ್ಸಿದ್ದರೆ ಸಾಕು. ರೆಡ್ ಕ್ರಾಸ್ ನಂತಹ ಸಂಸ್ಥೆಗಳಿಂದ ಏಕತೆ, ಮಾನವೀಯ ಸಂಬಂಧಗಳ ಬೆಳವಣಿಗೆ ಹಾಗು ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಶ್ರೀನಾಥ್ ಎಂ.ಪಿ ಹಾಗೂ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್. ಎಂ ಉಪಸ್ಥಿತರಿದ್ದರು.
ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಕೌನ್ಸಿಲರ್ ಹರ್ಷಿತ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಆದಿತ್ಯ ಧನ್ಯವಾದ ನೀಡಿದರು. ಕು.ಕಾವ್ಯ ಕಾರ್ಯಕ್ರಮ ನಿರೂಪಿಸಿದರು.