Site icon Suddi Belthangady

ಬೆಳ್ತಂಗಡಿ ಪ. ಪೂ. ಕಾಲೇಜಿನಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಜ.7 ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ತೋರಿಸಲು ಸದಾ ಉತ್ಸುಕರಾಗಿರಬೇಕು ಮುಂದಿನ ದಿನಗಳಲ್ಲಿ ಬೆಳ್ತಂಗಡಿಯ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಗುರುತಿಸುವಂತಾಗಲೆಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಉಪಾಧ್ಯಕ್ಷ ಜಯಾನಂದ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಬಿ.ಕೆ. ಧನಂಜಯ್ ರಾವ್ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ರೊನಾಲ್ಡ್ ಲೋಬೊ ವಿದ್ಯಾರ್ಥಿ ನಾಯಕರುಗಳಾದ ಸುಮಂತ್, ವಿರುಷ, ನಿಶಾಂತ, ಚೈತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕ ಆನಂದ ಡಿ. ಕಾಲೇಜಿನ ಶೈಕ್ಷಣಿಕ ವಾರ್ಷಿಕ ವರದಿ ವಾಚಿಸಿದರು ಹಾಗೂ ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜೇಂದ್ರ ಪ್ರೌಢಶಾಲೆಯ ವರದಿ ವಾಚಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಪ್ರಾಂಶುಪಾಲ ಸುಕುಮಾರ ಸ್ವಾಗತಿಸಿ, ಪ್ರೌಢಶಾಲಾ ಸಹ ಶಿಕ್ಷಕಿ ಪೂರ್ಣಿಮಾ ಭಟ್ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ಡಾ. ಗಣೇಶ್ ಭಟ್ ಹಾಗೂ ಪ್ರೌಢಶಾಲಾ ಸಹ ಶಿಕ್ಷಕಿ ಆಶಾಲತಾ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Exit mobile version