Site icon Suddi Belthangady

ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಸೌಜನ್ಯ ಕೊಲೆ ಆರೋಪಿಗಳ ಪತ್ತೆ ಮಾಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ- ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು ಸುಮಾರು 11 ವರ್ಷ ಕಳೆದರೂ ಕೂಡ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನಿಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸಂಬಂದ ಪಟ್ಟ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ನಿಜವಾದ ಆರೋಪಿಗಳ ಪತ್ತೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರಗಿಸಲು ಒತ್ತಾಯಿಸಿ ಸೆ.3 ರಂದು ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಜಾಪ್ರಭುತ್ವ ವೇದಿಕೆಯ ತಾಲೂಕು ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.

ಅವರು ಆ.16 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಂಕೀರ್ಣದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಘಟನೆ ನಡೆದ ಸಮಯದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ, ಸಿ ಓ ಡಿ ಮತ್ತು ದೇಶದ ಅತ್ಯುತ್ತಮ ತನಿಖಾ ಸಂಸ್ಥೆಯಾದ ಸಿಬಿಐ ಕೂಡ ನಿಜವಾದ ಅರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿದ್ದು ನಿರಪರಾಧಿ ಸಂತೋಷ್ ರಾವ್ ಮೇಲೆ ಸುಳ್ಳು ಆರೋಪನ್ನು ಕೂಲಂಕುಷವಾಗಿ ಪರಿಶೀಲಿಸಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಸಂದರ್ಭದಿಂದ ನಿಜವಾದ ಅರೋಪಿಗಳ ಪತ್ತೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ನ್ಯಾಯಾಂಗದ ಸುಪರ್ದಿಯಲ್ಲಿ ವಿಷೇಶ ತನಿಖಾ ತಂಡದ ಮುಖಾಂತರ ತನಿಖೆ ನಡೆಸಿ ಸೌಜನ್ಯ ಅತ್ಯಾಚಾರ ಕೊಲೆ ಮಾಡಿದ ಪರಮ ಪಾಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.ಕಳೆದ 11 ವರ್ಷಗಳಿಂದ ಹೋರಾಟ ಮಾಡುತ್ತಾ ಬರುತ್ತಿದ್ದು ನಮ್ಮ ಹೋರಾಟಕ್ಕೆ ಶಕ್ತಿ ಬಂದಿದೆ.ಶೇ.77 ಜನ ಸೌಜನ್ಯ ಪರ, ನ್ಯಾಯದ ಪರ ಇದ್ದಾರೆ.ನಮ್ಮ ಪ್ರತಿಭಟನೆಗೆ ಬರಲು ಯಾರನ್ನೂ ಒತ್ತಾಯ ಮಾಡುವುದಿಲ್ಲ.ಅಂಗಡಿ, ಆಟೋ ರಿಕ್ಷಾ ಬಂದು ಮಾಡಿ ಬರಲು ಒತ್ತಾಯಿಸುವುದಿಲ್ಲ.ಸ್ವಯಂ ಪ್ರೇರಿತರಾಗಿ ಶಾಂತಿಯುತ ಹೋರಾಟ ಮಾಡಿ ಸೌಜನ್ಯ ಕುಟುಂಬಕ್ಕೆ ನ್ಯಾಯಕ್ಕಾಗಿ ಹೋರಾಟ ಮಾಡಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪ್ರಜಾಪ್ರಭುತ್ವ ವೇದಿಕೆಯ ಕಾರ್ಯದರ್ಶಿ ಅನಿಲ್ ಅಂತರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮನೋಜ್ ಕುಂಜರ್ಪ, ತಾಲೂಕು ಗೌರವ ಅಧ್ಯಕ್ಷ ಹರೀಶ್ ಕುಮಾರ್, ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಜ್ವಲ್ ಉಪಸ್ಥಿತರಿದ್ದರು.

Exit mobile version