Site icon Suddi Belthangady

ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ತಣ್ಣೀರುಪಂತ ವಲಯ, ಜನಜಾಗೃತಿ ವೇದಿಕೆ ತಣ್ಣೀರುಪಂತ ವಲಯ ಮತ್ತು ಸರಕಾರಿ ಪ್ರೌಢ ಶಾಲೆ ಪುತ್ತಿಲ ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು.

ಬಾರ್ಯ ಸಹಕಾರಿ ಸಂಘದ ನಿರ್ದೇಶಕ ಪ್ರವೀಣ್ ರೈ ಪೊರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ-ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ.ಇವುಗಳಿಂದ ಹೊರಬರಲು ವಿದ್ಯಾರ್ಥಿಗಳಾದ ನಾವು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ.ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ-ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ.ಆರೋಗ್ಯವಂತ ಶರೀರವೇ ಆತ್ಮದ ಅರಮನೆ.ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ.ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಭೋದಿಸಿದರು.

ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಮಂಜ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ತಣ್ಣೀರುಪಂತ ಒಕ್ಕೂಟದ ವಲಯಾಧ್ಯಕ್ಷ ರಾಮಣ್ಣಗೌಡ, ಪುತ್ತಿಲ ಒಕ್ಕೂಟದ ವಲಯಾಧ್ಯಕ್ಷ ಉಮೇಶ್ ಇವರುಗಳು ಉಪಸ್ಥಿತರಿದ್ದರು.

ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

120 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಸೇವಾಪ್ರತಿನಿಧಿ ಶಿವರಾಮ ಸ್ವಾಗತಿಸಿದರು.ಶಿಕ್ಷಕ ವಸಂತ ನಿರೂಪಿಸಿದರು. ಮೇಲ್ವಿಚಾರಕಿ ವಿದ್ಯಾ ವಂದಿಸಿದರು.

Exit mobile version