ಸೌಜನ್ಯ ಪ್ರಕರಣದ ತನಿಖಾ ವಿಚಾರದಲ್ಲಿ ಕೇಂದ್ರ ಸರಕಾರ ನಿರ್ಧಾರ ಕೈಗೊಳ್ಳಬೇಕು: ಮಂಗಳೂರಿನಲ್ಲಿ ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

0

ಬೆಳ್ತಂಗಡಿ: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮುಂದಿನ ತನಿಖೆಯ ವಿಚಾರದಲ್ಲಿ ಕೇಂದ್ರ ಸರಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಉಡುಪಿಯಲ್ಲಿ ನಡೆಯುವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲು ಅ.೨೮ರಂದು ಆಗಮಿಸಿದ್ದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಸೌಜನ್ಯ ಪ್ರಕರಣದ ತನಿಖೆ ನಡೆಸಿದವರು ಸಿಬಿಐಯವರು.ಸಿಬಿಐ ನ್ಯಾಯಾಲಯ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಮುಂದೆ ಮೇಲ್ಮನವಿ ಹೋಗಬೇಕಾ ಅಥವಾ ಮರು ತನಿಖೆ ನಡೆಸಬೇಕಾ ಎಂಬ ತೀರ್ಮಾನವನ್ನು ಕೈಗೊಳ್ಳಬೇಕಾದವರು ಕೇಂದ್ರ ಸರಕಾರದವರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬಳಿಕ ರಾಜ್ಯಾದ್ಯಂತ ಸೌಜನ್ಯ ಪರ ಪ್ರತಿಭಟನೆ ನಡೆಯುತ್ತಿದೆ.

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಿಜವಾದ ಅಪರಾಧಿಗಳನ್ನು ಪತ್ತೆ ಹಚ್ಚಬೇಕು ಮತ್ತು ಪ್ರಕರಣದ ಮರು ತನಿಖೆ ನಡೆಯಬೇಕು ಎಂದು ವಿವಿದೆಡೆ ವಿವಿಧ ರೀತಿಯ ಹೋರಾಟ ನಡೆಯುತ್ತಿದೆ. ಇದೀಗ ಮುಖ್ಯಮಂತ್ರಿಯವರು ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here