Site icon Suddi Belthangady

ಬೆಳ್ತಂಗಡಿ: ಸರಕಾರಿ ಬಸ್ ಹತ್ತುವ ವೇಳೆ ಸರ ಕಳ್ಳತನ ಪ್ರಕರಣ-ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಠಾಣಾ ಪೊಲೀಸರು

ಬೆಳ್ತಂಗಡಿ: ಉದ್ಯೋಗಿ ಮಹಿಳೆಯೊಬ್ಬರು ಸರಕಾರಿ ಬಸ್ ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸರಕಾರಿ ಉದ್ಯೋಗಿಯಾಗಿರುವ ವಾರಿಜಾ ಎಂಬವರು ಬೆಳ್ತಂಗಡಿಯಲ್ಲಿ ಸರಕಾರಿ ಬಸ್ ಗೆ ಡಿ.12 ರಂದು ಹತ್ತುವ ವೇಳೆ 24 ಗ್ರಾಂ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು‌.ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ತಮಿಳುನಾಡು ರಾಜ್ಯದ ತಿರುಪುರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35ವ) ಮತ್ತು ದಿವ್ಯಾ ಯಾನೆ ಕಾಮಾಚಿ(30ವ) ಇಬ್ಬರನ್ನು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಆರೋಪಿಗಳ ಬಳಿಯಿಂದ ಪೊಲೀಸರಿಗೆ ನೀಡಿದ್ದಾರೆ.

ಆರೋಪಿಗಳ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ಪ್ರಕರಣ ದಾಖಲಾಗಿದ್ದು, ವಿಚಾರಣೆ ವೇಳೆ ಮುಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.ಇಬ್ಬರು ಆರೋಪಿಗಳನ್ನು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Exit mobile version