Site icon Suddi Belthangady

ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ- ಜಪ, ತಪ, ಧ್ಯಾನದಿಂದ ಮಾನಸಿಕ ಶಾಂತಿ, ನೆಮ್ಮದಿ: ಡಾ.ಡಿ.ವೀರೇಂದ್ರ ಹೆಗ್ಗಡೆ

ನಾರಾವಿ: ಬಸದಿಗೆ ಹೋಗಿ ದೇವರದರ್ಶನ ಮಾಡಿ, ವೃತ-ನಿಯಮಗಳೊಂದಿಗೆ ಜಪ, ತಪ, ಧ್ಯಾನ ಮಾಡಿದಾಗ ಆರೋಗ್ಯ ಸುಧಾರಣೆಯೊಂದಿಗೆ ಮಾನಸಿಕಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮೇ.04ರಂದು ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಮಹೋತ್ಸವ ಸಂದರ್ಭ ಆಯೋಜಿಸಿದ ಧಾರ್ಮಿಕಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾನ, ಧರ್ಮಾದಿ ಸತ್ಕಾರ್ಯಗಳಿಗೆ  ಅಂತಸ್ತು, ಸಂಪತ್ತಿನ ಇತಿ-ಮಿತಿ ಇರುವುದಿಲ್ಲ. ಶ್ರಾವಕರು, ಶ್ರಾವಕಿಯರು ಹಾಗೂ ಉದಾರ ದಾನಿಗಳು ಶ್ರದ್ಧಾ, ಭಕ್ತಿಯೊಂದಿಗೆ ತನು, ಮನ, ಧನದೊಂದಿಗೆ ನೀಡಿದ ದಾನ ಮತ್ತು ಸಕ್ರಿಯ ಸಹಕಾರದಿಂದ ಬಸದಿಯು ಆಕರ್ಷಕವಾಗಿ ಮೂಡಿ ಬಂದಿದೆ. ಬಸದಿಗೆ ಬಂದಾಗ ಇಲ್ಲಿ ಸ್ವಲ್ಪ ಹೊತ್ತು ಇದ್ದು ಧ್ಯಾನ, ಪ್ರಾರ್ಥನೆ, ಜಪ-ತಪ ಮಾಡುವ ಪ್ರೇರಣೆ ಸಿಗುತ್ತದೆ. ಇಂತಹ ಪವಿತ್ರ ಶ್ರದ್ಧಾ ಕೇಂದ್ರಗಳಿAದ ಜೈನಧರ್ಮದ ಅಹಿಂಸೆ, ತ್ಯಾಗ, ಸಂಯಮ, ತಾಳ್ಮೆ ಮೊದಲಾದ ಮಾನವೀಯ ಮೌಲ್ಯಗಳೊಂದಿಗೆ ಆದರ್ಶ ಜೀವನ ನಡೆಸಲು ಸ್ಪೂರ್ತಿ, ಪ್ರೇರಣೆ ಸಿಗುತ್ತದೆ.

ಜೈನರ ಪ್ರಭಾವದಿಂದ ಅನ್ಯಧರ್ಮಿಯರು ಕೂಡಾ ಮದ್ಯ, ಮಾಂಸ, ಮಧು ತ್ಯಾಗ, ರಾತ್ರಿಭೋಜನ ತ್ಯಾಗ ಮೊದಲಾದವುಗಳನ್ನು ಪಾಲಿಸಿ ಸಾತ್ವಿಕ ಜೀವನ ನಡೆಸುತ್ತಿರುವುದು ಶ್ಲಾಘನೀಯವಾಗಿದೆ.ನಾರಾವಿ ಬಸದಿ ಅತಿಶಯ ಕ್ಷೇತ್ರವಾಗಿ ಬೆಳೆಯಲಿ, ಬೆಳಗಲಿ ಎಂದು ಹೆಗ್ಗಡೆಯವರು ಹಾರೈಸಿದರು.

ಆಶೀರ್ವಚನ ನೀಡಿದ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕಸ್ವಾಮೀಜಿ, ಆಚಾರ್ಯ ಪರಂಪರೆಯಿಂದ ದೇವರು, ಗುರುಗಳು ಮತ್ತು ಶಾಸ್ತçದ ಮೂಲಕ ಧರ್ಮಪ್ರಭಾವನೆಯಾಗುತ್ತಿದೆ. ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಬಿಂಬ ಪ್ರತಿಷ್ಠಾಪನೆ ಮಾಡಿದಾಗ ಮಂದಿರದಲ್ಲಿ ಸಾನ್ನಿಧ್ಯವೃದ್ಧಿಯೊಂದಿಗೆ  ಶ್ರದ್ಧಾಕೇಂದ್ರವಾಗಿ ಬೆಳೆಯುತ್ತದೆ. ಬೆಳಗುತ್ತದೆ ಎಂದರು.

ಮೂಡಬಿದ್ರೆಯ ವಕೀಲರಾದ ಶ್ವೇತಾ ಜೈನ್, ಧಾರ್ಮಿಕ ಉಪನ್ಯಾಸ ನೀಡಿ, ಧರ್ಮದ ಮರ್ಮವನ್ನರಿತು ನಿತ್ಯವೂ ಅನುಷ್ಠಾನಗೊಳಿಸಬೇಕು. ಆತ್ಮ ಬೇರೆ, ದೇಹ ಬೇರೆ ಎಂಬ ಸತ್ಯವನ್ನರಿತು ದೇವರದರ್ಶನ, ಪ್ರಾರ್ಥನೆ, ಧ್ಯಾನ, ಉಪವಾಸ ಮೊದಲಾದ ವೃತ-ನಿಯಮಗಳ ಪಾಲನೆಯೊಂದಿಗೆ ಕರ್ಮನಿರ್ಜರೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್ ಮಾತನಾಡಿ, ಬಸದಿ ಜೀರ್ಣೋದ್ಧಾರದಿಂದ ಧರ್ಮಜಾಗೃತಿಯೊಂದಿಗೆ ಧರ್ಮಪ್ರಭಾವನೆಯೂ ಆಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಶ್ಲಾಘನೀಯವಾಗಿದೆ. ಜೈನಧರ್ಮ ಸಾರ್ವಕಾಲಿಕ ಧರ್ಮವಾಗಿದ್ದು, ಬಸದಿಗಳ ಜೀರ್ಣೋದ್ಧಾರದಿಂದ ಧರ್ಮಪ್ರಭಾವನೆಯಾಗುತ್ತದೆ ಎಂದರು.

ಬದುಕಿನ ಎಲ್ಲಾ ಸವಾಲುಗಳನ್ನು, ಸಮಸ್ಯೆಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸಿ ಉನ್ನತ ಸಾಧನೆ ಮಾಡಿ ಸ್ವಾವಲಂಬಿ ಜೀವನ ನಡೆಸುತ್ತಿರುವ ಮೂಡಬಿದ್ರೆಯ ನ್ಯಾಯವಾದಿ ಶ್ವೇತಾಜೈನ್ ಅವರನ್ನು ಅಭಿನಂದಿಸಿದರು.

ಮಾಜಿ ಸಚಿವ ಕೆ. ಅಭುಯಚಂದ್ರ ಜೈನ್, ಮೂಡಬಿದ್ರೆ ಎಕ್ಸಲೆಂಟ್  ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ವಸಂತ ಭಟ್ ನಾರಾವಿ ಉಪಸ್ಥಿತರಿದ್ದರು.ಅರವಿಂದ ಜೈನ್ ಸ್ವಾಗತಿಸಿದರು.ಕಾರ್ಯಕ್ರಮ ನಿರ್ವಹಿಸಿದ  ಕರುಣಾಕರ ಜೈನ್ ಧನ್ಯವಾದವಿತ್ತರು.

Exit mobile version