Site icon Suddi Belthangady

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಲಯದಲ್ಲಿ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ

ಮೂಡುಬಿದಿರೆ: ಆಧುನಿಕ ಸಮಾಜದ ಬಹುದೊಡ್ಡ ಸವಾಲು ಮಾದಕ ದ್ರವ್ಯ ಸೇವನೆಯಾಗಿದೆ. ವಿಶೇಷವಾಗಿ ಯುವಜನತೆ ದುರ್ವ್ಯಸನಗಳಿಗೆ ದಾಸರಾಗಿ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಶಾಪವಾಗಿ ಪರಿಣಮಿಸುತ್ತಿದ್ದಾರೆ. ತಾತ್ಕಾಲಿಕ ಮೋಜಿಗಾಗಿ ಆರಂಭವಾಗುವ ಮಾದಕ ವಸ್ತುಗಳ ಸೇವನೆಯಿಂದ ಅವರ ಭವಿಷ್ಯವನ್ನು ನಾಶಮಾಡುವ ಜೊತೆಗೆ ಸಮಾಜದ ನೆಮ್ಮದಿಯನ್ನು ಕೆಡಿಸುವರು. ಮನುಷ್ಯನ ನರಮಂಡಲದ ಮೇಲೆ ಪರಿಣಾಮ ಬೀರುವ ಇಂತಹ ದುಶ್ಚಟಗಳಿಂದ ದೂರವಿದ್ದು ವೈಯಕ್ತಿಕ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ ಪಿ.ಜಿ ಅವರು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆಯ ಅಡ್ಡ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಅವರು ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ ಹದಿಹರೆಯದ ಸಮಸ್ಯೆಗಳಲ್ಲಿ ಮಾದಕ ವಸ್ತು ಸೇವನೆಯು ಪ್ರಮುಖವಾದುದು. ಅವುಗಳಿಂದ ಉಂಟಾಗುವ ಅನರ್ಥಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಸುರಕ್ಷಿತ ಮತ್ತು ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಮಾಜ ಸ್ಪಂದಿಸಬೇಕಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ದಿವಾಕರ ರೈ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version