ಪತ್ರಿಕಾಗೋಷ್ಠಿ: ಸರಕಾರಿ ಪ್ರಾಯೋಜಿತ ದಂಗೆಯ ಮಾತುಗಳಿಗೆ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಖಂಡನೆ

0

ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರು ಅನುಮತಿ ಕೊಟ್ಟದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿದರು.

ಅವರು ಆ.21ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಚಿವ ಜಮೀರ್ ರವರು ರಾಜ್ಯದಲ್ಲಿ ಆಗುವ ಅನಾಹುತಗಳಿಗೆ ರಾಜ್ಯಪಾಲರೇ ಜವಾಬ್ದಾರಿ ಎನ್ನುತ್ತಾರೆ.ಎಂಎಲ್‌ಸಿ ಐವಾನ್ ಡಿ’ಸೋಜ ಅವರು ಬಾಂಗ್ಲಾ ಮಾದರಿ ದಾಳಿ ಮಾಡಬೇಕಾಗುತ್ತದೆ ಎನ್ನುತ್ತಾರೆ. ರಕ್ಷಿತ್ ಶಿವರಾಮ್ ರವರು ಪ್ರಧಾನಿ ನರೇಂದ್ರ ಮೋದಿಯವರು ಹಾಸಿಗೆ ದಿಂಬು ಕಟ್ಟಿಕೊಂಡು ಓಡಬೇಕಾಗುತ್ತದೆ ಎನ್ನುತ್ತಾರೆ. ರಾಜ್ಯಪಾಲರ ತೀರ್ಮಾನ ಸರಿಯೇ ತಪ್ಪೇ ಎಂದು ಪ್ರಶ್ನಿಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಪ್ರಶ್ನಿಸಲು ಅವಕಾಶವಿದೆ. ನ್ಯಾಯಾಲಯಕ್ಕೆ ಹೋದಾಗ ಅಲ್ಲಿ 29ರವರೆಗೆ ಅಂದರೆ 10 ದಿನ ತಡೆಯಾಜ್ಞೆ ನೀಡಿದ್ದಾರೆ. ಹಾಗಿದ್ದರೆ ಈ ದೂರುದಾರರು ನ್ಯಾಯಾಧೀಶರ ಮೇಲೆ ಸ್ಟ್ರೈಕ್ ಮಾಡಿದರೆ ಹೇಗಿದ್ದೀತು.ಒಂದು ವೇಳೆ ನ್ಯಾಯಾಧೀಶರು ಸಿದ್ದರಾಮಯ್ಯನವರ ವಿರುದ್ಧ ತೀರ್ಪು ಕೊಟ್ಟರೆ ನ್ಯಾಯಾಧೀಶರ ವಿರುದ್ಧ ಇವರು ದಂಗೆ ಏಳಿಸ್ತಾರ, ಅವರ ಪ್ರತಿಕೃತಿ ದಹನ ಮಾಡುವರೇ, ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ, ಸಂವಿಧಾನದತ್ತ ಅಧಿಕಾರ ಬಳಸಿ ಅವರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನಿಖೆಯನ್ನೇ ಯಾಕೆ ವಿರೋಧಿಸುತ್ತಿದೆ, ರಾಜ್ಯಪಾಲರು ಸಿದ್ಧರಾಮಯ್ಯನವರು ಅಪರಾಧಿ ಎಂದು ಹೇಳಿಲ್ಲ.ಪ್ರತಿಭಟನೆ ವೇಳೆ ಕಲ್ಲು ತೂರಾಟ ಮಾಡಿದ್ದಾರೆ. ಟಯರ್‌ ಗಳನ್ನೂ ಸುಟ್ಟಿದ್ದಾರೆ. ಇವರು ಕರ್ನಾಟಕವನ್ನು ಏನು ಮಾಡಲು ಹೊರಟಿದ್ದಾರೆ, ಈ ದೇಶದಲ್ಲಿ ಎರಡು ಬಾರಿ ಸಿಎಂ ಆದ, 40 ವರ್ಷಗಳ ರಾಜಕೀಯ ಜೀವನದ ಅಗಾಧ ಅನುಭವವುಳ್ಳ ಸಿದ್ಧರಾಮಯ್ಯನವರು ಸೇರಿ ಯಾರು ಕೂಡ ಸಂವಿಧಾನಕ್ಕಿಂತ ಮೇಲಲ್ಲ. ಸಿದ್ಧರಾಮಯ್ಯನವರು ಸಂವಿಧಾನಕ್ಕಿಂತ ಮೇಲೆ ಎಂದು ತಿಳಿದುಕೊಳ್ಳುವುದು ಅವರ ಅಹಂಕಾರವನ್ನು ತೋರಿಸುತ್ತದೆ ಎಂದು ಹೇಳಿದರು.

ಐವಾನ್ ಡಿ’ಸೋಜ ಸೇರಿದಂತೆ ಯಾರೆಲ್ಲ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದರೋ, ದಾಳಿ ಮಾಡುವುದಾಗಿ ಬೆದರಿಸಿದ್ದಾರೋ ಭಯೋತ್ಪಾದಕರ ತರಹ ಮಾತನಾಡಿದ್ದಾರೋ ಅವರ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಎಷ್ಟೋ ಪ್ರಕರಣಗಳಲ್ಲಿ ದೂರುದಾರರೇ ಇಲ್ಲದೆ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗುತ್ತಿದೆ. ಆದರೆ, ಇಲ್ಲಿ ಇನ್ನೂ ಯಾಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here