

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಮಾ.21ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.
ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.