Site icon Suddi Belthangady

ಹೆರಿಗೆಯ ನಂತರ ತೀವ್ರ ರಕ್ತಸ್ರಾವ: ನಾರಾವಿಯ ಮಹಿಳೆ ಮೃತ್ಯು

ನಾರಾವಿ: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ ೪ ರಂದು ನಡೆದಿದೆ. ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿಯಾದ ಮಧುರಾ ಆರು ವರ್ಷಗಳ ಹಿಂದೆ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರೊಂದಿಗೆ ವಿವಾಹವಾಗಿದ್ದರು. ಮಧುರಾರಿಗೆ ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದ್ದು, ಎರಡನೆ ಮಗುವಿನ ಹೆರಿಗೆಗಾಗಿ ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.3ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಅವರಿಗೆ ರಾತ್ರಿ 9 ಗಂಟೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ತಕ್ಷಣ ಎಚ್ಚೆತ್ತ ವೈದ್ಯರು ಮಧುರಾ ಅವರನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿಲಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12.37ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಮಧುರಾರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿ ಮನೆಯಲ್ಲಿ ಅಂತಿಮ ಸಂಸ್ಕಾರಕ್ಕೆ ತಯಾರಿಯನ್ನು ನಡೆಸಲಾಗಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಮನೆಯವರಿಗೆ ಹಸ್ತಾಂತರಿಸಿದ ಬಗ್ಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮತ್ತಿತ್ತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು. ಶವದ ಮರಣೋತ್ತರ ಪರೀಕ್ಷೆ ನಡೆಸದೆ ಮೃತ ದೇಹವನ್ನು ತುರ್ತಾಗಿ ಬಿಡುಗಡೆ ಮಾಡಲಾಗಿದೆ. ಮಧುರಾ ಅವರ ಸಾವಿಗೆ ವೈದ್ಯಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ, ಶವದ ಮರಣೋತ್ತರ ಪರೀಕ್ಷೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮೃತ ಮಧುರಾ ಅವರ ಕುಟುಂಬಸ್ಥರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತಕ್ಷಣ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ನಾರಾವಿಯ ಮನೆಗೆ ಬಂದು ಪರಿಶೀಲನೆ ನಡೆಸಿ ಮನೆಯವರ ಜೊತೆ ಮಾತುಕತೆ ನಡೆಸಿದ ನಂತರದಲ್ಲಿ ಮೃತದೇಹವನ್ನು ಪುನಃ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ನಾರಾವಿಯ ಪತಿಯ ಮನೆಯ ಬಳಿ ಅಂತ್ಯಸಂಸ್ಕಾರವನ್ನು ನಡೆಸಲಾಯಿತು.

Exit mobile version