ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆ, ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘ, ಶಾಲಾ ವಿದ್ಯಾಭಿಮಾನಿಗಳ, ಹಾಗೂ ದಾನಿಗಳ ಸಹಕಾರದಿಂದ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮುಸ್ತಫಾ ಇವರ ನೇತೃತ್ವದಲ್ಲಿ ಜೂ. 9ರಂದು ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಸಿ. ಯ ಅಧ್ಯಕ್ಷ ಮುಸ್ತಫರವರು ವಹಿಸಿದ್ದರು. ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಜಾಮುದ್ದೀನ್, ಲೀಲಾವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ನೇಸರ, ಪೆರೋಡಿತ್ತಾಯಕಟ್ಟೆ ಅಂಗನವಾಡಿ ಶಿಕ್ಷಕಿ ಸ್ಫೂರ್ತಿ, ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಪಾಯಿಸ್ ಉಪಸ್ಥಿತರಿದ್ದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು, ಸ್ಲೇಟ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ನಂತರ ಶಾಲಾ ಅಭಿವೃದ್ಧಿಗೆ ಶ್ರಮಿಸಿದ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಜಾಮುದ್ದೀನ್, ಪ್ರಸನ್ನ, ಲೀಲಾವತಿ ಇವರನ್ನು ಶಾಲಾ ಅಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು. ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಸ್ತಫರವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಬೆನೆಡಿಕ್ಟ ಪಾಯಿಸ್ ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕ ರಾಜೇಶ್ ನಿರೂಪಿಸಿದರು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ದೇವಿಕಾ ವಂದಿಸಿದರು.