ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸೃಷ್ಟಿ 2025 – ಫ್ರೆಶರ್ಸ್ ಡೇ ಮತ್ತು ಓರಿಯೆಂಟಷನ್ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನ ಮಾಡಿ, ಉದ್ಘಾಟನೆ ಮಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ, ವಾಣಿಜ್ಯ ಶಾಸ್ತ್ರ ಎಲ್ಲವನ್ನೂ, ಎಲ್ಲರನ್ನೂ ಒಳಗೊಂಡಿದೆ. ವಾಣಿಜ್ಯ ಶಾಸ್ತ್ರದ ನೆರವಿಲ್ಲದೆ ಆಧುನಿಕ ಯುಗದಲ್ಲಿ ಬದುಕಲು ಸಾಧ್ಯವಿಲ್ಲ. ಹಿಂದೆಂದಿಗಿಂತಲೂ ಈಗ ವಾಣಿಜ್ಯ ಕ್ಷೇತ್ರಕ್ಕೆ ಹೆಚ್ಚು ಬೇಡಿಕೆಯಿದೆ ಎಂದರು.
ಪ್ರಾಂಶುಪಾಲ ನವೀನ್ ಕುಮಾರ್ ಮರಿಕೆ ಮಾತನಾಡಿ, ಉತ್ತಮ ಜ್ಞಾನ ಇರುವ ಶಿಕ್ಷಕ, ತನ್ನ ವಿದ್ಯಾರ್ಥಿಗಳನ್ನು ಆ ಮಟ್ಟಕ್ಕೆ ಏರಿಸುತ್ತಾನೆ. ಅಂಥ ಒಳ್ಳೆಯ ಶಿಕ್ಷಕರು ಎಕ್ಸೆಲ್ ನಲ್ಲಿದ್ದು ಅವರ ಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕ ಅರುಣ್ ಕ್ಯಾಸ್ಟಲಿನೋ, ವಿದ್ಯಾರ್ಥಿಗಳಿಗೆ ವಾಣಿಜ್ಯ ಕ್ಷೇತ್ರದಲ್ಲಿರುವ ಭವಿಷ್ಯದ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ. ಪ್ರಾಸ್ತಾವಿಕ ಮಾತು ಗಳನ್ನಾಡಿದರು.
ವಾಣಿಜ್ಯ ವಿಭಾಗದ ವಿಭಾಗದ ಮುಖ್ಯಸ್ಥ ಪ್ರಸನ್ನ ಭೋಜ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಭಾಕರ್ ಉಪಸ್ಥಿತರಿದ್ದರು. ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪೂರಕ ಪುಸ್ತಕಗಳನ್ನು ಅನಾವರಣ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಯಿತು. ಈ ಮೂಲಕ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲೇ ತಯಾರಿ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಯಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವವನ್ನು ಸಲ್ಲಿಸಲಾಯಿತು. ನಶ್ವಾನ್ ಪಾಷಾ CSEET ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು. ಒಲಂಪಿಯಾಡ್ ಚಿನ್ನದ ಪದಕ ವಿಜೇತರನ್ನು ಗೌರವಿಸಲಾಯಿತು. ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕೂಡ ಅಭಿನಂದಿಸಲಾಯಿತು.
ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಯಾಣ ಪೊನ್ನಮ್ಮ ಮತ್ತು ಯುಕ್ತಿ ಗೌಡ ನಿರ್ವಹಿಸಿದರು. ವಿದ್ಯಾರ್ಥಿಗಳಾದ ಅಭಿಷ್ಟಾ ಸ್ವಾಗತಿಸಿದರು. ಸೃಷ್ಟಿ ಶೈಕ್ಷಣಿಕ ಮಾಹಿತಿ, ಮನರಂಜನೆಯ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ದಿಯಾ ಧನ್ಯವಾದ ಸಮರ್ಪಿಸಿದರು.