Site icon Suddi Belthangady

ಉಜಿರೆ: ಶ್ರೀ ಧ.ಮಂ.ಪ. ಪೂ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘ  ‘ವ್ಯುತ್ಪತ್ತಿ’ ಇದರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ 2025-26ನೇ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜೂ. 20ರಂದು ನಡೆಯಿತು.

ಉದ್ಘಾಟನೆಯನ್ನು ನೆರವೇರಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಾಧವ ಎಂ.ಕೆ. ಮಾತನಾಡಿ ವಿದ್ಯಾರ್ಥಿಗಳು ಕೇವಲ ಅಂಕಗಳಿಸುವ ಯಂತ್ರಗಳಾಗದೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜೀವನದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುವ ಗುರಿ ಹೊಂದಬೇಕು.

ಕಾಲೇಜು ಜೀವನವನ್ನು ಅರ್ಥಪೂರ್ಣವಾಗಿ ಕಳೆದಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಸಾಹಿತ್ಯ, ಸಂಗೀತ ಹಾಗೂ ಪುಸ್ತಕಗಳ ಓದು ಜೀವನದಲ್ಲಿ ತಾಳ್ಮೆ,ಶಿಸ್ತು ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ತಮಗೆ ಜೀವನಾನುಭವವನ್ನು ಕಲಿಸಿದ ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳನ್ನು ಕೃತಜ್ಞತಾ ಭಾವದಿಂದ ಸ್ಮರಿಸಿಕೊಂಡರು. ಇದೇ ಸಂದರ್ಭದಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳು ರಚಿಸಿದ ಮಾಸಿಕ ಪತ್ರಿಕೆ   ‘ವ್ಯುತ್ಪತ್ತಿ ‘ ಇದನ್ನು ಅನಾವರಣಗೊಳಿಸಿದರು.

ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ.ಮಾತನಾಡಿ ವ್ಯುತ್ಪತ್ತಿ ಸಂಘವು ವಿದ್ಯಾರ್ಥಿ ಸ್ನೇಹಿಯಾಗಿ ಅವರ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಲಿ ಹಾಗೂ ಆ ಮೂಲಕ ವಿದ್ಯಾರ್ಥಿಗಳು ತಮ್ಮ ಅಭಿರುಚಿಗಳನ್ನು ಪೋಷಿಸುವಂತಾಗಲಿ ಎಂದು ಶುಭ ಹಾರೈಸಿದರು.

ವಿವಿಧ ಕ್ಷೇತ್ರದಲ್ಲಿ  ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡು ಸಾಧನೆ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಮಾಧವ ಎಂ. ಕೆ. ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಪ್ರಾಕೃತ ಡಿಪ್ಲೊಮಾ ಪೂರೈಸಿರುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಉಪಪ್ರಾಂಶುಪಾಲ ರಾಜೇಶ್ ಬಿ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶ್ರಿಪೂರ್ಣ ವ್ಯುತ್ಪತ್ತಿ ವಿದ್ಯಾರ್ಥಿ ಮಾಸ ಪತ್ರಿಕೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಣವ್ ಭಟ್ ಅತಿಥಿಗಳನ್ನು ಪರಿಚಯಿಸಿದರು. ನಿಜಾಕುಲಾಲ್ ಕಳೆದ ಶೈಕ್ಷಣಿಕ ವರ್ಷದ ಸಂಘದ ವರದಿ ವಾಚಿಸಿ ಶ್ರೀಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕರಾದ ದಿವ್ಯಾ ಕುಮಾರಿ, ಸಾಜಿದಾ ಹಾಗೂ ಶ್ಯಾಮಿಲ ಸಹಕರಿಸಿದರು. ವಿದ್ಯಾರ್ಥಿ ಧರೇಶ್ ಸ್ವಾಗತಿಸಿ, ಲಿಖಿತಾ ವಂದಿಸಿದರು.

Exit mobile version