
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದೆ. ಸೇರಿದ್ದ ಜನರನ್ನು ಚದುರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗುತ್ತಿದೆ. ಧರ್ಮಸ್ಥಳ ಪಾಂಗಾಳದಲ್ಲಿ ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ, ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಿಸಲಾಗುತ್ತಿದೆ.
ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿದ್ದು ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ.
ಈ ದಿನ ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.