
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು, ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.
ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ, ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಘನತೆ, ಗೌರವವನ್ನು ಕಾಪಾಡುತ್ತದೆ.
ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನ್ನ ತನಿಖೆಯ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದರು.