ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಭಾರತೀಯ ಆಚರಣೆಗಳನ್ನು ಉಳಿಸಿ ಬೆಳೆಸುವ ಸದುದ್ದೇಶದಿಂದ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದಿಂದ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆಯನ್ನು ಆಯೋಜಿಸಲಾಗಿತ್ತು. ಪ್ರಾಂಶುಪಾಲ ಸಂತೋಷ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಓಣಂ ನೃತ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗಾಗಿ ಪೂಕಳಂ ಸ್ಪರ್ಧೆ, ರಾಂಪ್ ವಾಕ್ ಮತ್ತು ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಆಚರಣೆಯ ವಿಶೇಷ ಆಕರ್ಷಣೆಯಾಗಿ ಪೂಕಳಂ ಸ್ಪರ್ಧೆ ನಡೆಯಿತು. ಇದರಲ್ಲಿ ವಿದ್ಯಾರ್ಥಿಗಳು ಓಣಂ ಹಬ್ಬದ ಸಾರವನ್ನು ಪ್ರತಿಬಿಂಬಿಸುವ ಸುಂದರ ಹೂವಿನ ವಿನ್ಯಾಸಗಳನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಕ್ಯಾಂಪಸ್ನಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು.
ಕಾರ್ಯಕ್ರಮದ ಸಂಯೋಜಕ ಈಶ್ವರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.