ಸಹಕಾರಿ ಬಂಧುಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ-ಧರ್ಮಜಾಗೃತಿ ಸಮಾವೇಶ-ಧರ್ಮಸ್ಥಳದ ಪಾವಿತ್ರ್ಯತೆ ರಕ್ಷಣೆಗೆ ಸದಾ ಸಿದ್ಧ: ಡಾ.ಎಂ.ಎನ್.ಆರ್.

0

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಯನ್ನು ಜಾತಿ ಮತ, ಪಕ್ಷ ಬೇಧ ಮರೆತು ಸರ್ವ ಸಹಕಾರಿಗಳೂ ಒಕ್ಕೊರಲಿನಿಂದ ಖಂಡಿಸುತ್ತೇವೆ ಮತ್ತು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಹಾಗೂ ಧರ್ಮಸ್ಥಳದ ಪಾವಿತ್ರ್ಯದ ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳ ನೇತೃತ್ವದಲ್ಲಿ ಭಾನುವಾರ ಧರ್ಮಸ್ಥಳಕ್ಕೆ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳಲ್ಲಿ ಆಗಮಿಸಿದ ಧರ್ಮಜಾಗೃತಿ ಜಾಥಾದ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಧರ್ಮಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಎಲ್ಲರೂ ಸದಾ ಹೆಗ್ಗಡೆಯವರ ಜೊತೆಗಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಧರ್ಮಸ್ಥಳ ಕ್ಷೇತ್ರದ ರಕ್ಷಣೆ ಮಾಡುವುದು ಎಲ್ಲಾ ಭಕ್ತರು ಹಾಗೂ ಅಭಿಮಾನಿಗಳ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಇಂತಹ ಪವಿತ್ರ ಸೇವೆಯಿಂದ ಭಕ್ತರ ಮನಸ್ಸಿಗೂ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಡಾ. ರಾಜೇಂದ್ರ ಕುಮಾರ್ ಹೇಳಿದರು.

ಸತ್ಯದ ಜೊತೆಗೆ ನಾವಿದ್ದೇವೆ-ಡಾ.ಆಳ್ವ: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಧರ್ಮಸ್ಥಳದ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿದ್ದೇವೆ. ಸತ್ಯಮೇವ ಜಯತೇ ಎಂಬಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯದ ಜೊತೆಗೆ ನಾವಿದ್ದೇವೆ ಎಂದು ಹೇಳಿದರು.

ಹೆಗ್ಗಡೆಯವರ ನೇತೃತ್ವದಲ್ಲಿ ಹಲವು ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಧರ್ಮಸ್ಥಳ ಇಂದು ಇಡೀ ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.

ಉತ್ಸಾಹ-ಭರವಸೆ ಮೂಡಿಸಿದೆ-ಡಾ.ಹೆಗ್ಗಡೆ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ, ಗೌರವ ಮತ್ತು ಅಭಿಮಾನ ತಮಗೆ ಹೆಚ್ಚಿನ ಉತ್ಸಾಹ ಮತ್ತು ಭರವಸೆ ಮೂಡಿಸಿದೆ ಎಂದರು.
ಸಹಕಾರಿ ಕ್ಷೇತ್ರವನ್ನು ತಮ್ಮ ಮಾರ್ಗದರ್ಶಿತ್ವ ಮತ್ತು ನಾಯಕತ್ವದೊಂದಿಗೆ ಜನಪ್ರಿಯಗೊಳಿಸಿದ ರಾಜೇಂದ್ರ ಕುಮಾರ್ ಅವರ ಸೇವೆ, ಸಾಧನೆಯನ್ನು ಶ್ಲಾಘಿಸಿದ ಹೆಗ್ಗಡೆ ಅವರು ಸಮಾಜಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಇಂತಹ ದಕ್ಷ, ಪ್ರಾಮಾಣಿಕ ಹಾಗೂ ನಿಷ್ವಾರ್ಥ ನಾಯಕರ ಅಗತ್ಯವಿದೆ ಎಂದು ಹೇಳಿದರಲ್ಲದೆ ಸಹಕಾರಿ ರಂಗವನ್ನು ರಾಜ್ಯಮಟ್ಟದ ಖ್ಯಾತಿಗೆ ಬೆಳೆಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ೫ ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೆ ಧರ್ಮಸ್ಥಳದಿಂದ ಎಲ್ಲಾ ಸಹಕಾರಿ ಸಂಘಗಳಿಗೂ ಸಕಾಲಿಕ ನೆರವು, ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದ ಹೆಗ್ಗಡೆ ಅವರು ಮಾಧ್ಯಮಗಳಲ್ಲಿ ಅಪಪ್ರಚಾರ ಹಾಗೂ ಸುಳ್ಳು ವದಂತಿ ಪ್ರಸಾರದಿಂದ ತಮಗೆ ಆಘಾತಕರವಾದ ನೋವು ಉಂಟಾಗಿದೆ. ಧಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಚಂದ್ರನಾಥ ಸ್ವಾಮಿ ಇಬ್ಬರೂ ಶಾಂತ ಸ್ವಭಾವದವರಾಗಿದ್ದು, ದೇವರ ಅನುಗ್ರಹ, ಧರ್ಮದೇವತೆಗಳು ಮತ್ತು ಅಣ್ಣಪ್ಪ ಸ್ವಾಮಿಯ ಅಭಯದಿಂದ ನೋವು ಮರೆಯಲು ಸಾಧ್ಯವಾಗಿದೆ ಎಂದರು. ಅಪವಾದ, ಅಪಪ್ರಚಾರ ಮಾಡಿದವರಿಗೂ ಅಭಿನಂದನೆ ಹೇಳುವುದಾಗಿ ತಿಳಿಸಿದ ಡಾ. ಹೆಗ್ಗಡೆಯವರು ಅವರಿಂದಾಗಿ ಪ್ರತಿದಿನ ಸಾವಿರಾರು ಮಂದಿ ಧರ್ಮಸ್ಥಳಕ್ಕೆ ಬಂದು ತಮ್ಮ ಪ್ರೀತಿ-ವಿಶ್ವಾಸ, ಗೌರವ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪುತ್ತೂರು, ಕಡಬ, ಸುಳ್ಯದವರು ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಮಂದಿ ಜಾಥಾ ಮತ್ತು ಸಭೆಯಲ್ಲಿ ಭಾಗವಹಿಸಿದ್ದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿದರು.

LEAVE A REPLY

Please enter your comment!
Please enter your name here